Karnataka news paper

ವೈಷ್ಣೋದೇವಿ ಕಾಲ್ತುಳಿತ ದುರಂತ: ರಾಷ್ಟ್ರಪತಿ ಕೋವಿಂದ್, ರಾಜನಾಥ್ ಸಿಂಗ್ ಸೇರಿ ಗಣ್ಯರಿಂದ ಸಂತಾಪ


ANI

ನವದೆಹಲಿ: ಹೊಸ ವರ್ಷದ ದಿನದಂದೇ ವೈಷ್ಣೋದೇವಿ ಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದು, ದುರ್ಘಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದುರಂತ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ ಸಂಭವಿಸಿ ಜನರು ಸಾವನ್ನಪ್ಪಿರುವುದು ದುರಾದೃಷ್ಟಕರ ಸಂಗತಿ. ಸುದ್ದಿ ತಿಳಿದು ಬಹಳ ನೋವಾಗಿದೆ ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಮಾತಾ ವೈಷ್ಣೋ ಭವನದಲ್ಲಿ ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿರುವುದು ಹೃದಯ ವಿದ್ರಾವಕವಾಗಿದೆ. ಕಾಲ್ತುಳಿತದಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದು ಬೇಸರ ತರಿಸಿದೆ. ಈ ದುಃಖದ ಸಮಯದಲ್ಲಿ ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಕೇಂದ್ರ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಟ್ವೀಟ್ ಮಾಡಿ, ಮಾತಾ ವೈಷ್ಣೋದೇವಿ ದೇಗುಲದಲ್ಲಿ ದುರಂತ ಸಂಭವಿಸಿದ ಬಳಿಕ ಪರಿಸ್ಥಿತಿ ಅವಲೋಕಿಸಲು ಕತ್ರಾಗೆ ಭೇಟಿ ನೀಡುತ್ತಿದ್ದೇನೆ. ಅಧಿಕಾರಿಗಳ ಬಳಿ ದುರಂತ ಕುರಿತು ಚರ್ಚೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಜಮ್ಮುವಿನ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಪ್ರಧಾನಿ ಮೋದಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡಲು ಸೂಚನೆಗಳನ್ನು ನೀಡಿದ್ದಾರೆಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ, ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.



Read more