Karnataka news paper

ಐದು ರಾಜ್ಯಗಳ ವಿಧಾನಸಭೆ ಚುನಾವಣೆ: ಶನಿವಾರ ಮಧ್ಯಾಹ್ನ ದಿನಾಂಕ ಪ್ರಕಟ


ಹೈಲೈಟ್ಸ್‌:

  • ಕೋವಿಡ್ ಭೀತಿಯ ನಡುವೆಯೇ ಐದು ರಾಜ್ಯಗಳ ವಿಧಾನಸಭೆ ಚುನಾವಣೆ
  • ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣಾ ದಿನಾಂಕಗಳ ಘೋಷಣೆ
  • ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳಿಗೆ ಹೊಸ ಸರ್ಕಾರ

ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ನಡುವೆಯೇ, ಅವಧಿ ಪೂರೈಸುತ್ತಾ ಬಂದಿರುವ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳನ್ನು ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳಿಗೆ ಮಧ್ಯಾಹ್ನ 3.30ರ ಸುಮಾರಿಗೆ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.

ಚುನಾವಣೆ ನಡೆಯಲಿರುವ ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರದ ಆಡಳಿತವಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ.
ಚುನಾವಣಾ ರ‍್ಯಾಲಿ, ರೋಡ್‌ ಶೋಗಳು ಬೇಡ: ಚು. ಆಯೋಗಕ್ಕೆ ಕೋವಿಡ್ ಟಾಸ್ಕ್‌ ಫೋರ್ಸ್‌ ಮುಖ್ಯಸ್ಥರ ಶಿಫಾರಸ್ಸು
ಉತ್ತರ ಪ್ರದೇಶ ಮತ್ತು ಪಂಜಾಬ್ ಚುನಾವಣೆ ಹೆಚ್ಚು ಕುತೂಹಲ ಮೂಡಿಸಿದೆ. ಪಂಜಾಬ್ ಚುನಾವಣೆ ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿದೆ. ಅಧಿಕಾರ ಉಳಿಸಿಕೊಳ್ಳುವುದು ಅದಕ್ಕೆ ಸವಾಲಾಗಿದೆ. ಈ ಬಾರಿ ಆಮ್ ಆದ್ಮಿ ಪಕ್ಷ ಕೂಡ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿದೆ. ಇನ್ನೊಂದೆಡೆ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದು, ಬಿಜೆಪಿ ಹಾಗೂ ಇತರೆ ಪಕ್ಷಗಳ ಜತೆಗೆ ಕೈಜೋಡಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯು ಬಿಜೆಪಿಗೆ ನಿರ್ಣಾಯಕವಾಗಿದೆ. ಕೋವಿಡ್ ಸಾಂಕ್ರಾಮಿಕವನ್ನು ನಿಭಾಯಿಸಿದ ರೀತಿ ವಿಚಾರದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಇನ್ನೊಂದೆಡೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೆ ನಿಕಟ ಸ್ಪರ್ಧೆಯೊಡ್ಡುವ ಮಟ್ಟಕ್ಕೆ ಬೆಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶಕ್ಕೆ ನಿರಂತರವಾಗಿ ಭೇಟಿ ನೀಡಿ, ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದರು.

ಉತ್ತರ ಪ್ರದೇಶ ಚುನಾವಣೆ ಫಲಿತಾಂಶವು 2024ರಲ್ಲಿ ನಡೆಯುವ ಲೋಕಸಭೆ ಚುನಾವಣೆಗೂ ತಳಹದಿಯಾಗಿದೆ. 403 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ, 80 ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆ ನಡೆಯುತ್ತದೆ.
ಓಮಿಕ್ರಾನ್‌ ಭೀತಿ: ಉತ್ತರ ಪ್ರದೇಶದಲ್ಲಿ ಚುನಾವಣಾ ರ‍್ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್‌
ಗೋವಾದಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆ ಇದೆ. ಎಎಪಿ ಹಾಗೂ ತೃಣಮೂಲ ಕಾಂಗ್ರೆಸ್‌ಗಳು ಈ ಬಾರಿ ಅಲ್ಲಿ ಕಾಂಗ್ರೆಸ್‌ಗಿಂತಲೂ ಶಕ್ತಿಶಾಲಿ ಪಕ್ಷಗಳಾಗಿ ಬೆಳೆಯುತ್ತಿವೆ. ಹೀಗಾಗಿ ಬಿಜೆಪಿಗೆ ಮೂರು ಪಕ್ಷಗಳ ಸವಾಲು ಎದುರಾಗುತ್ತಿದೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಪಕ್ಷೇತರರು ಹಾಗೂ ಪ್ರಾದೇಶಿಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬಿಜೆಪಿ ಸರ್ಕಾರ ರಚಿಸಿತ್ತು. ಈಗ ಕಾಂಗ್ರೆಸ್‌ನ ಬಹುತೇಕ ಶಾಸಕರು ಪಕ್ಷ ತೊರೆದು ಟಿಎಂಸಿ ಸೇರಿಕೊಂಡಿದ್ದಾರೆ.

ಉತ್ತರಾಖಂಡದಲ್ಲಿ ಕೂಡ ಬಿಜೆಪಿಗೆ ಕಾಂಗ್ರೆಸ್ ಮತ್ತು ಎಎಪಿ ಸವಾಲು ಹಾಕುತ್ತಿವೆ. ಬಿಜೆಪಿ ಆರು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಗಳನ್ನು ಬದಲಿಸಿತ್ತು. ತ್ರಿವೇಂದ್ರ ಸಿಂಗ್ ರಾವತ್ ಅವರ ಸ್ಥಾನಕ್ಕೆ ಮಾರ್ಚ್‌ನಲ್ಲಿ ತೀರತ್ ಸಿಂಗ್ ರಾವತ್ ನೇಮಕವಾಗಿದ್ದರೆ, ಜುಲೈನಲ್ಲಿ ಪುಷ್ಕರ್ ಸಿಂಗ್ ಧಾಮಿ ಸಿಎಂ ಗದ್ದುಗೆಗೆ ಏರಿದ್ದರು.

ಮಣಿಪುರದಲ್ಲಿಯೂ 60 ಸೀಟುಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ 28 ಸೀಟುಗಳಲ್ಲಿ ಗೆಲುವು ಕಂಡಿತ್ತು. ಇಲ್ಲಿ ಕೂಡ ಬಿಜೆಪಿ ಪ್ರಾದೇಶಿಕ ಪಕ್ಷಗಳ ವಿಶ್ವಾಸ ಗಳಿಸಿಕೊಂಡು ಸರ್ಕಾರ ರಚನೆ ಮಾಡಿತ್ತು.
ಓಮಿಕ್ರಾನ್‌ ಭೀತಿ: ಪಂಜಾಬ್‌ನಲ್ಲಿ ನೈಟ್‌ ಕರ್ಫ್ಯೂ, ಶಾಲೆ-ಕಾಲೇಜು ಬಂದ್‌; ಚುನಾವಣಾ ರ‍್ಯಾಲಿಗಳಿಗಿಲ್ಲ ನಿರ್ಬಂಧ
ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವುದರಿಂದ ಉತ್ತರ ಪ್ರದೇಶ ಚುನಾವಣೆಯನ್ನು ಮುಂದೂಡುವುದು ಒಳಿತು. ಜನರ ಜೀವಕ್ಕಿಂತ ಯಾವುದೂ ಮುಖ್ಯವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಎಲ್ಲ ಪಕ್ಷಗಳೂ ಅವಧಿಗೆ ಅನುಗುಣವಾಗಿಯೇ ಚುನಾವಣೆ ನಡೆಸಬೇಕೆಂದು ಅಭಿಪ್ರಾಯಪಟ್ಟಿವೆ ಎಂದು ಆಯೋಗ ತಿಳಿಸಿತ್ತು.



Read more

[wpas_products keywords=”deal of the day sale today offer all”]