ಕೆಂಪೇಗೌಡ ಬಡಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆದ ಕೆಂಪೇಗೌಡ ಬಡಾವಣೆ ಗುತ್ತಿಗೆದಾರರು, ಎಂಜಿನಿಯರ್ಗಳು ಮತ್ತು ನಿವೇಶನದಾರರ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.
ಬಡಾವಣೆ ನಿರ್ಮಾಣದಲ್ಲಾಗುತ್ತಿರುವ ವಿಳಂಬ ಹಾಗೂ ನಿರ್ಮಾಣ ವೆಚ್ಚ ಹೆಚ್ಚಾಗುತ್ತಿರುವ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ ಅಧ್ಯಕ್ಷರು, ‘ಯಾವುದೇ ಕಾರಣಕ್ಕೂ ಇನ್ನು ಮುಂದೆ ನಿರ್ಮಾಣ ವೆಚ್ಚ ದುಬಾರಿಯಾಗಬಾರದು. ಕಾಮಗಾರಿಗಳು ತ್ವರಿತವಾಗಿ ಮುಗಿಯಬೇಕು’ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಅಧ್ಯಕ್ಷ ಎಸ್. ಆರ್. ವಿಶ್ವನಾಥ್, ‘ಗುಣಮಟ್ಟ ಮತ್ತು ಕಾಮಗಾರಿ ವಿಳಂಬದ ಬಗ್ಗೆ ಪರಿಶೀಲನೆ ನಡೆಸಲು ಸರಕಾರ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ವರದಿ ನೀಡಲು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ನೇಮಕ ಮಾಡಲಾಗುತ್ತಿದೆ. ಈ ಸಂಸ್ಥೆ ಆದಷ್ಟು ಶೀಘ್ರ ಪರಿಶೀಲನೆ ನಡೆಸಿ ಬಿಡಿಎಗೆ ವರದಿ ನೀಡಲಿದೆ. ವರದಿಯನ್ನು ಅಧ್ಯಯನ ನಡೆಸಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ಅವರು ಹೇಳಿದರು.
ಹಣಕಾಸಿನ ತೊಂದರೆ ಇಲ್ಲ: ‘ಕೆಂಪೇಗೌಡ ಬಡಾವಣೆ ಕಾಮಗಾರಿಗಳಿಗೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ. ಗುತ್ತಿಗೆದಾರರಿಗೆ ಬಾಕಿ ಇರುವ ಹಣದಲ್ಲಿ ಸ್ವಲ್ಪ ಭಾಗವನ್ನು ಪ್ರಾಧಿಕಾರದ ಸಭೆಯ ಅನುಮೋದನೆ ಪಡೆದ ನಂತರ ಬಿಡುಗಡೆ ಮಾಡಲಾಗುತ್ತದೆ’ ಎಂದು ಅವರು ತಿಳಿಸಿದರು.
ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ: ‘ಕಾಮಗಾರಿ ಈಗಾಗಲೇ ವಿಳಂಬವಾಗಿದೆ. ಈಗ ಮತ್ತಷ್ಟು ವಿಳಂಬವಾಗುವುದು ಬೇಡ. ಗುತ್ತಿಗೆದಾರರು ಕಾಮಗಾರಿಗಳನ್ನು ಮುಂದುವರಿಸಬೇಕು. ಕೂಡಲೇ ಕುಡಿಯುವ ನೀರು, ವಿದ್ಯುತ್ ಮತ್ತು ಇತರೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.
‘ಕೆಂಪೇಗೌಡ ಬಡಾವಣೆಯಲ್ಲಿನ ಮೂಲೆ ನಿವೇಶನಗಳ ಹರಾಜಿನಿಂದ ಬರುವ ಹಣವನ್ನು ಅದೇ ಬಡಾವಣೆಯ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತದೆ. ಕಾರ್ಯ ಪ್ರಗತಿ ಪರಿಶೀಲಿಸಿದ ನಂತರವೇ ಗುತ್ತಿಗೆದಾರರ ಬಿಲ್ ಪಾವತಿ ಮಾಡಬೇಕು’ ಎಂದು ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆಯುಕ್ತ ರಾಜೇಶ್ ಗೌಡ, ಅಭಿಯಂತರ ಸದಸ್ಯ ಡಾ. ಶಾಂತರಾಜಣ್ಣ, ಆರ್ಥಿಕ ಸದಸ್ಯ ರಾಮಪ್ರಸಾದ್, ವಿಶೇಷ ಭೂಸ್ವಾಧೀನಾಧಿಕಾರಿ ಡಾ. ಸೌಜನ್ಯಾ, ನಾಡ ಪ್ರಭು ಕೆಂಪೇಗೌಡ ಬಡಾವಣೆಯ ನಿವೇಶನದಾರರ ಮುಕ್ತ ವೇದಿಕೆ ಪ್ರಧಾನ ಕಾರ್ಯದರ್ಶಿ ಅಶೋಕ್, ಜಂಟಿ ಕಾರ್ಯದರ್ಶಿ ಸೂರ್ಯಕಿರಣ್, ಅಜಿತ್ ಮತ್ತಿತರರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Read more
[wpas_products keywords=”deal of the day sale today offer all”]