Online Desk
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಇನ್ನೂ ವರ್ಷ ಇರುವಾಗಲೇ ಸದ್ದಿಲ್ಲದೆ ಸಿದ್ಧತೆಗಳನ್ನು ಆರಂಭಿಸಿ ಕನ್ನಡ ಸಂಘಟನೆಗಳು, ರೈತ ಮುಖಂಡರು, ನೀರಾವರಿ ಹೋರಾಟಗಾರರು, ದಲಿತ ನಾಯಕರು ಒಳಗೊಂಡ ʼಕನ್ನಡಿಗರ ಮಹಾಮೈತ್ರಿಕೂಟʼ ರಚನೆ ಮಾಡುವ ಸುಳಿವು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು ಚುನಾವಣೆಗೆ ಇನ್ನೂ ೧೪ ತಿಂಗಳ ಸಮಯವಿದೆ. ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇನೆ. ಈಗಾಗಲೇ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಮಾಡಿದ್ದೇನೆ. ಅದೇ ರೀತಿ ರೈತರು, ದಲಿತ ಮುಖಂಡರು, ನೀರಾವರಿ ಹೋರಾಟಗಾರರನ್ನು ಕೂಡ ಸದ್ಯದಲ್ಲೇ ಭೇಟಿ ಮಾಡಲಿದ್ದೇನೆ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷದ ಸರಕಾರ ತರಬೇಕು. ಕನ್ನಡಿಗರದ್ದೇ ಸರಕಾರ ತರಲು ʼಕನ್ನಡಿಗರ ಮಹಾಮೈತ್ರಿಕೂಟʼವನ್ನು ಚುನಾವಣೆಗೆ ಮುನ್ನವೇ ರಚನೆ ಮಾಡಲು ಸಿದ್ಧತೆ ನಡೆಸಿದ್ದೇನೆ. ಇನ್ನೆರಡು ತಿಂಗಳಲ್ಲಿ ಅದರ ರೂಪುರೇಷೆಯ ಜನತೆಗೆ ತಿಳಿಯಲಿದೆ ಎಂದರು.
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಕನ್ನಡಿಗರನ್ನು ದ್ವಿತೀಯ ದರ್ಜೆ ಪ್ರಜೆಗಳಂತೆ ನೋಡುತ್ತಿರುವುದಕ್ಕೆ ಸಡ್ಡು ಹೊಡೆಯಲು ನಿರ್ಧರಿಸಿರುವ ಅವರು ನಾಡು, ನುಡಿ, ನೆಲ, ಜಲ ಸೇರಿದಂತೆ ಕರ್ನಾಟಕ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ʼಕನ್ನಡಿಗರ ಪ್ರಾದೇಶಿಕ ಸರಕಾರʼ ತರುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ವರ್ಷಕ್ಕೆ ಮುನ್ನವೇ ಹೊಸ ಹೆಜ್ಜೆ ಇರಿಸಿದ್ದಾರೆ. ರಾಜ್ಯವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡಿದ್ದು ಸಾಕು. ಕನ್ನಡಿಗರ ಹಿತಾಸಕ್ತಿಗಳನ್ನು ಅವರು ಕಡೆಗಣಿಸಿ ರಾಜ್ಯವನ್ನು ದುಃಸ್ಥಿತಿಗೆ ದೂಡಿದ್ದೂ ಸಾಕು. ಈಗಲಾದರೂ ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದು ಅವರು ಹೇಳಿದರು.
ನಮ್ಮ ಗುರಿ 123 ಕ್ಷೇತ್ರ:
ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರಕಾರ ಬರುತ್ತದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು; “ಈಗಿನ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೆ ಹೇಳಿದ್ದಾರೆ. ನಾನು ಸಹ ಮೊನ್ನೆ ಒಂದು ಕಡೆ ಹೇಳಿದ್ದೆ. ಜೆಡಿಎಸ್ ಬಿಟ್ಟು ಯಾರೂ ಸರಕಾರ ಮಾಡಲಿಕ್ಕೆ ಆಗಲ್ಲ ಎಂದಿದ್ದೆ. ಹಾಗೆಂದ ಮಾತ್ರಕ್ಕೆ 123 ಸ್ಥಾನಕ್ಕಿಂತ ಕೆಳಗೆ ಬರುತ್ತೇವೆ ಎಂದಲ್ಲ. ನಮ್ಮ ಗುರಿ 123 ಸ್ಥಾನ ಗೆಲ್ಲುವುದು. ಮುಂದಿನ ಚುನಾವಣೆಗೆ ಈ ಗುರಿ ಇಟ್ಟುಕೊಂಡೇ ಹೊರಟಿದ್ದೇವೆ ಎಂದರು.
123 ಸ್ಥಾನ ಗೆಲ್ಲಲೇಬೇಕೆಂಬ ಛಲ ನಮ್ಮ ಪಕ್ಷದ್ದು. ಅದು ದೊಡ್ಡ ಸವಾಲು ಎನ್ನುವ ಅರಿವೂ ನನಗಿದೆ. ದೇವೇಗೌಡರ ಹೇಳಿಕೆ ಇವತ್ತಿನ ಪರಿಸ್ಥಿತಿಯನ್ನು ಬಿಂಬಿಸುವಂತಿದೆ. ಇಂದಿನ ಸ್ಥಿತಿಯಲ್ಲಿ ಯಾರಿಗೂ ಬಹುಮತ ಬರವುದಿಲ್ಲ. ಇದು ರಾಜಕೀಯ ಪಂಡಿತರ ಲೆಕ್ಕಾಚಾರ, ಈ ಹಿನ್ನೆಲೆಯಲ್ಲಿ ಅವರು ಹೇಳಿದ್ದಾರೆ. ಇನ್ನೂ ಒಂದು ವರ್ಷ ಸಮಯವಿದ್ದು, ಏನು ಬೇಕಾದರೂ ಆಗಬಹುದು. ಈಗ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುತ್ತಿದೆ. ಅದೇ ರೀತಿ ಕರ್ನಾಟಕದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಬದಿಗಿಟ್ಟು ಪ್ರಾದೇಶಿಕ ಪಕ್ಷವನ್ನು ಜನ ಬೆಂಬಲಿಸಿ, ಪ್ರಾದೇಶಿಕ ಹಿನ್ನೆಲೆಯುಳ್ಳ ಕನ್ನಡಿಗರ ಸರಕಾರ ತರುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಈ ನಿಟ್ಟಿನಲ್ಲಿ ಸಂಘಟನೆಗಳನ್ನು ಒಂದುಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.
Read more
[wpas_products keywords=”deal of the day”]