Source : The New Indian Express
ಮೈಸೂರು: ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಬೇಕಾಗಿದ್ದ 20 ಲಕ್ಷ ಕೋಟಿ ರು ಪ್ಯಾಕೇಜ್ ಹಣವನ್ನು ಇನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸುಮಾರು 50 ಲಕ್ಷ ಜನರು ಸಾವನ್ನಪ್ಪಿದ್ದಾರೆ ಮತ್ತು ಕರ್ನಾಟಕದಲ್ಲಿ ಐದು ಲಕ್ಷ ಜನರು ಕೋವಿಡ್ -19 ಗೆ ಬಲಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರ ಸಂಬಂಧಿಕರಿಗೆ ಪರಿಹಾರ ನೀಡಲಾಗಿದೆಯೇ ಅಥವಾ ಇಲ್ಲವೇ ಎಂಬುದು ಯಾರಿಗೂ ತಿಳಿದಿಲ್ಲ ಎಂದು ದೂರಿದ್ದಾರೆ. ಕೋವಿಡ್ ಎರಡನೇ ಅಲೆಗೆ ಸರ್ಕಾರ ಸಿದ್ಧವಾಗಿರಲಿಲ್ಲ, ಇದರಿಂದ ಅನ್ನದಾತರು ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ಚಿಂತಿಸದಿರುವುದು ದುರದೃಷ್ಟಕರ ಎಂದಿದ್ದಾರೆ.
ಅತಿವೃಷ್ಟಿಯಿಂದ ಆರು ಲಕ್ಷ ಹೆಕ್ಟೇರ್ಗೂ ಹೆಚ್ಚು ಬೆಳೆ ನಷ್ಟವಾಗಿದ್ದು, ಸಾವಿರಾರು ಮನೆಗಳು ಹಾನಿಗೀಡಾಗಿದ್ದು, ಸಮೀಕ್ಷೆ ನಡೆಸಿ ಪರಿಹಾರ ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೇವೆ ಎಂದು ಹೇಳಿಕೊಂಡ ಅವರು, ಬಿಜೆಪಿ ಸರ್ಕಾರ ಒಂದೇ ಒಂದು ಮನೆಯನ್ನು ನಿರ್ಮಿಸಿಲ್ಲ ಮತ್ತು ಕಾಂಗ್ರೆಸ್ ಆಡಳಿತದಲ್ಲಿ ಮಂಜೂರಾದ ಮನೆಗಳಿಗೆ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ವಿದ್ಯಾಶ್ರೀ, ಇಂದಿರಾ ಕ್ಯಾಂಟೀನ್, ಶಾದಿ ಭಾಗ್ಯ ಮತ್ತು ಇತರ ಯೋಜನೆಗಳಂತಹ ಕಲ್ಯಾಣ ಕಾರ್ಯಕ್ರಮಗಳನ್ನ ಸರ್ಕಾರ ರದ್ಧುಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿನ ಬಿಜೆಪಿ ಸರಕಾರ ಅತ್ಯಂತ ಭ್ರಷ್ಟ ಸರಕಾರ ಎಂದು ಬಣ್ಣಿಸಿದ ಅವರು, ಟೆಂಡರ್ ನೀಡಲು ಶೇ.40ರಷ್ಟು ಕಮಿಷನ್ ಪಡೆದು ಅಭಿವೃದ್ಧಿಗೆ ಶೇ.20ರಷ್ಟು ಹಣ ಬಳಸಿದ್ದಾರೆ. ಬೆಲೆ ಏರಿಕೆ ತಡೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. 2023ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.