Online Desk
ಬೆಂಗಳೂರು: ಬೆಳಗಾವಿಯಲ್ಲಿ ಪುಂಡರ ಗಲಾಟೆ ವಿಚಾರ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಭಯ ಹುಟ್ಟಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಹೇಳಿದ್ದಾರೆ.
ಘಟನೆ ಕುರಿತು ಸುದ್ದಿಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅವರು, ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೆ ನಮ್ಮ ಸರ್ಕಾರ ಬಿಡಲ್ಲ. ಅವರ ವಿರುದ್ಧ ಕಾನೂನು ಕ್ರಮಗಳ ಕೈಗೊಳ್ಳಲಾಗುತ್ತದೆ. ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯವಿದು. ಇಂತಹ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುತ್ತೇವೆಂದು ಹೇಳಿದ್ದಾರೆ.
ಇಂತಹ ಪುಂಡಾಟಗಳನ್ನು ಹತ್ತಿಕ್ಕುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇವೆ. ತಪ್ಪಿತಸ್ಥರಿಗೆ ಈ ಬಾರಿ ಭಯ ಹುಟ್ಟಿಸುತ್ತೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮಗಳನ್ನು ಕಾದು ನೋಡಿ ಎಂದು ತಿಳಿಸಿದ್ದಾರೆ.